Big News
Trending

ಏಪ್ರಿಲ್ 28ರಂದು ಶಿರಸಿಗೆ ಆಗಮಿಸಲಿದ್ದಾರೆ ನರೇಂದ್ರ ಮೋದಿ: ಎಲ್ಲೆಲ್ಲಿ ರೋಡ್ ಶೋ?

ಶಿರಸಿ: ಪ್ರಧಾನಿ ನರೇಂದ್ರ ಮೋದಿ ( Modi ) ಏಪ್ರಿಲ್ 28 ರಂದು ಶಿರಸಿಗೆ ಲೋಕಸಭಾ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಭೆ ನಡೆಯಲಿದೆ. ಈ ಬಗ್ಗೆ ಶಿರಸಿಯ ದೀನದಯಾಳ ಸಭಾಭವನದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರಧಾನಿ ಮೋದಿಯವರು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆಗೆ ಆಗಮಿಸಲಿದ್ದಾರೆ.

ಕ್ಷೇತ್ರದ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಸುಮಾರು 1 ಲಕ್ಷಕ್ಕಿಂತ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದರು. ವಿಶ್ವದ ಮೆಚ್ಚಿನ ನಾಯಕ ನರೇಂದ್ರ ಮೋದಿ ಪ್ರಧಾನಿಯಾದ ನಂತರ ಪ್ರಪ್ರಥಮ ಬಾರಿಗೆ ಶಿರಸಿ ನಗರಕ್ಕೆ ಆಗಮಿಸಲಿದ್ದು, ಪೂರ್ವ ಸಿದ್ಧತೆಯನ್ನು ಈಗಾಗಲೇ ಕೈಗೊಳ್ಳಲಾಗುತ್ತಿದೆ.

ಕಿತ್ತೂರ, ಖಾನಾಪುರ ಒಳಗೊಂಡ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ 1 ಲಕ್ಷ ಕಾರ್ಯಕರ್ತರು ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ. ಏ.28 ರಂದು ಕರ್ನಾಟಕದ ಶಿರಸಿ, ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ. ಬೆಳಿಗ್ಗೆ 11 ಘಂಟೆಗೆ ಶಿರಸಿಯ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ ಎಂದರು.

ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮಾತನಾಡಿ, ಸುಖಾಸುಮ್ಮನೆ ಅಧಿಕಾರಿ ದುರುಪಯೋಗಪಡಿಕೊಳ್ಳುವ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುತ್ತಿದೆ. ಅದನ್ನು ಕಾನೂನು ಹೋರಾಟದ ಮೂಲಕ ಎದುರಿಸುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ, ಪಕ್ಷದ ಪ್ರಮುಖರಾದ ಗೋವಿಂದ ನಾಯ್ಕ ಭಟ್ಕಳ, ಶಿವಾಜಿ ನರಸಾನಿ, ಆರ್.ವಿ.ಹೆಗಡೆ ಚಿಪಗಿ ಇದ್ದರು.

ವಿಸ್ಮಯ ನ್ಯೂಸ್, ಶಿರಸಿ

Back to top button