ಮುಂದಿನ‌ ಚುನಾವಣೆಯಲ್ಲಿ 50 ಸಾಧು ಸಂತರು ಸ್ಪರ್ಧಿಸುತ್ತೇವೆ:ನಾನೇ ಮೊದಲು ಭಟ್ಕಳದಲ್ಲಿ ಈ ಪ್ರಯೋಗ ಮಾಡಿಸುತ್ತೇನೆ: ಸಂಚಲನ‌ ಸೃಷ್ಠಿಸಿದ ಬ್ರಹ್ಮಾನಂದ ಶ್ರೀಗಳ ಹೇಳಿಕೆ?

ಸುನೀಲ್ ನಾಯ್ಕ, ಮಂಕಾಳ ವೈದ್ಯ, ಜೆ.ಡಿ.ನಾಯ್ಕ, ಆರ್.ಎನ್.ನಾಯ್ಕ ಯಾರೇ ಆಕಾಂಕ್ಷಿ ಇದ್ದರೂ ಈ ವೇಳೆ ಹಿಂದೆ ಸರಿಯುತ್ತಾರೆ ಎಂದು ಭಾವಿಸಿದ್ದೇನೆ: ಶ್ರೀಗಳು

ಭಟ್ಕಳ: ರಾಮರಾಜ್ಯದ ಪರಿಕಲ್ಪನೆಯಲ್ಲಿ ಹೊಸ ಸಂಸ್ಥೆಯೊಂದನ್ನು ಹುಟ್ಟು ಹಾಕುತ್ತೇವೆ. ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50 ಕ್ಷೇತ್ರಗಳಲ್ಲಿ ಸಾಧು- ಸಂತರು ಸ್ಪರ್ಧಿಸಲಿದ್ದಾರೆ ಎಂದು ನಾಮಧಾರಿ ಕುಲಗುರುಗಳಾದ, ಉಜಿರೆ ಶ್ರೀರಾಮ ಕ್ಷೇತ್ರದ ಮಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಘೋಷಿಸಿದ್ದಾರೆ.

ಭಟ್ಕಳದಲ್ಲಿ ನಡೆಯುತ್ತಿರುವ ಶ್ರೀಕ್ಷೇತ್ರ ಸಾರದಹೊಳೆ ಹಳೆಕೋಟೆ ಹನುಮಂತ ದೇವರ  ಸಭಾ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸುನೀಲ್ ನಾಯ್ಕ, ಮಾಜಿ ಶಾಸಕರಾದ ಜೆ.ಡಿ.ನಾಯ್ಕ, ಆರ್.ಎನ್.ನಾಯ್ಕ ಇತರರ ಉಪಸ್ಥಿತಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಭಟ್ಕಳದಲ್ಲೇ ಬ್ರಹ್ಮಾನಂದರು ಈ ಪ್ರಯೋಗ ಮಾಡುತ್ತಾರೆ. ಚುನಾವಣೆ ಪ್ರಚಾರಕ್ಕೆ ನೀವ್ಯಾರು ಬೇಡ, ನನ್ನ 5 ಲಕ್ಷ ನಾಗಾಸಾಧುಗಳು ಬರುತ್ತಾರೆ ಎಂದರು.

ನಾವು ಸನ್ಯಾಸಿಗಳು ತಯಾರಾಗಿದ್ದೇವೆ. ನಮಗೆ ಆದಿತ್ಯನಾಥರ ಪ್ರೇರಣೆ:‘ರಾಜರುಗಳು (ಜನಪ್ರತಿನಿಧಿಗಳು) ಪ್ರಜೆಗಳನ್ನ ತಮ್ಮ ಮಕ್ಕಳಂತೆ ಕಾಣುವ ಕೆಲಸವಾಗಬೇಕು’ ಎಂದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ನಾವು ಇಡೀ ದೇಶವನ್ನು ಸುತ್ತುವ ಸಂತರು. ನಮ್ಮದು ಒಂದು ಜುನಾಕಾರವಿದೆ. ಸುಮಾರು 5 ಲಕ್ಷ ಸಾಧು- ಸಂತರುಗಳಲ್ಲಿ ನಾನೂ ಒಬ್ಬ. ನಾವು ಎರಡು- ಮೂರು ತಿಂಗಳಿಗೆ ಕುಳಿತು ಮಾತನಾಡುತ್ತೇವೆ. ಈ ರಾಜ್ಯಾಂಗದ ವ್ಯವಸ್ಥೆ ದಿಕ್ಕು ತಪ್ಪುತ್ತಿದೆ ಎಂಬ ಕಳವಳ ವ್ಯಕ್ತಪಡಿಸಿದೆವು.

ವಿಧಾನಸಭೆಯಲ್ಲಿ ಮಾರ್ಕೆಟ್‌ನಲ್ಲಿ ಗಲಾಟೆ ಆದಂತೆ ಆಗುತ್ತದೆ. ಎಷ್ಟೋ ಸಲ ನಮ್ಮ ವಿಧಾನಸಭಾಧ್ಯಕ್ಷರಾದವರ ಪರಿಸ್ಥಿತಿ ನೋಡಿದಾಗ ಬೇಸರವಾಗುತ್ತದೆ. ಅದನ್ನು ನೋಡಿದರೆ ಸಂವಿಧಾನ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ, ರಾಜ್ಯಾಂಗದ ಪರಿಕಲ್ಪನೆ ಇದೆಯೇ ಇಲ್ಲವೋ ಗೊತ್ತಾಗುವುದಿಲ್ಲ. ಇದಕ್ಕೆಲ್ಲ ಕಾರಣ ಸಮಗ್ರ ಬದಲಾವಣೆ ಆಗಬೇಕು. ಹೀಗಾಗಿ ನಾವು ಸನ್ಯಾಸಿಗಳು ತಯಾರಾಗಿದ್ದೇವೆ. ಇದಕ್ಕೆ ನಮಗೆ ಆದಿತ್ಯನಾಥರ ಪ್ರೇರಣೆ. ಉತ್ತರಾಖಂಡದಲ್ಲಿ ಈ ಬಗ್ಗೆ ಅನೇಕ ಸಭೆಗಳನ್ನೂ ನಡೆಸಿದ್ದೇವೆ’ ಎಂದರು

ರಾಜಕೀಯಕ್ಕೆ ಬರುವುದೇ ಸುಖಕ್ಕಾಗಿ!:ರಾಜ್ಯಾಂಗ, ಸಂವಿಧಾನ ಏನೆಂದೇ ನಮ್ಮ ನಾಯಕರುಗಳಿಗೆ ಗೊತ್ತಿಲ್ಲ ಎಂದ ಅವರು, ರಾಜಕೀಯಕ್ಕೆ ಬರುವುದೇ ಸುಖಕ್ಕಾಗಿ, ಪ್ರಚಾರಕ್ಕಾಗಿ, ದುಡ್ಡಿಗಾಗಿ ಎಂಬುದು ಒಬ್ಬ ಗ್ರಾಮ ಪಂಚಾಯತಿ ಸದಸ್ಯನಿಂದ ಹಿಡಿದು ಎಲ್ಲರ ಪರಿಕಲ್ಪನೆಯಾಗಿದೆ. ಕಾನೂನು ಗೊತ್ತಿಲ್ಲದವರು ರಾಜ್ಯಾಂಗದೊಳಗೆ ಬಂದು ಕಾನೂನು ಮಾಡಲು ಹೇಗೆ ಸಾಧ್ಯ? ಹೀಗಾಗಿ ತಿದ್ದುಪಡಿಯೊಂದನ್ನು ಮಾಡಬೇಕು.

ಯಾರೇ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಆತ ಕನಿಷ್ಠ ಪದವಿಯನ್ನಾದರೂ ಪಡದಿರಬೇಕು. ಮಂತ್ರಿಯಾಗಲು ಕಾನೂನು ವಿದ್ವಾಂಸರೇ ಆಗಿರಬೇಕು. 4ನೇ ಕ್ಲಾಸು, 10ನೇ ಕ್ಲಾಸು ಓದಿದವರನ್ನ ಮಂತ್ರಿ ಮಾಡಿದರೆ ರಾಜ್ಯದ ಕಾನೂನುಗಳನ್ನು ಹೇಗೆ ಮಾಡುತ್ತಾರೆ? ಎಂದು ಪ್ರಶ್ನಿಸಿದರು.

ಸನಾತನ ಹಿಂದೂ ಧರ್ಮವನ್ನ ತಿದ್ದಬೇಕು:‘ನಾವು ಬೇಸತ್ತು ಹೋಗಿದ್ದೇವೆ. ನಿಮಗೆ ರಿಪೇರಿ ಮಾಡಲು ಬರುತ್ತಿಲ್ಲ. ಇದು ದುಃಖ ಆಗುತ್ತಿದೆ’ ಎಂದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ನಮಗೆ ಸಂಬಳ ಕೊಡುವುದು ಬೇಡ. ನಮಗೆ ಪಡಿತರ ಅಥವಾ ಊಟ ಕೊಟ್ಟರೆ ಸಾಕು. ನಮ್ಮ ಪರಿಕಲ್ಪನೆ ಸನಾತನ ಹಿಂದೂ ಧರ್ಮವನ್ನ ತಿದ್ದಬೇಕು. ಆದರೆ ಈಗಿರುವವರಿಗೆ ತಿದ್ದಲು ಆಗುತ್ತಿಲ್ಲ. ಪ್ರವಾಸಕ್ಕೆ ಮಂತ್ರಿಗಳನ್ನ ವಿದೇಶಕ್ಕೆ ಕಳುಹಿಸಿತ್ತೀರಿ.

1- 2 ಲಕ್ಷದ ರೂಮಿನಲ್ಲಿ ವಾಸ್ತವ್ಯ ಹೂಡುತ್ತಾರೆ. ಏನು ಪ್ರಯೋಜನ? ನಿದ್ದೆ ಮಾಡಲು 1- 2 ಲಕ್ಷದ ರೂಮು ಯಾಕಯ್ಯ? 5- 6 ಗಂಟೆಯ ನಿದ್ರೆಯನ್ನ 500 ರೂಪಾಯಿಯ ರೂಮಿನಲ್ಲೂ ಮಾಡಬಹುದು. 50- 100 ರೂಪಾಯಿಗೆ ಊಟ ಸಿಗುತ್ತದೆ. ಆದರೆ ಬೇಕಾಬಿಟ್ಟಿಯಾಗಿ ಪ್ರಜೆಗಳ ದುಡ್ಡನ್ನ ಪೋಲು ಮಾಡಲಾಗುತ್ತಿದೆ. ಇದನ್ನ ನೋಡಿದರೆ ನಮಗೆ ಕಣ್ಣೀರು ಬರುತ್ತದೆ. ತಪಸ್ಸು ಮಾಡಿದರೆ ಉದ್ಧಾರ ಮಾಡಲಾಗುವುದಿಲ್ಲ ಎಂದು ನಾವೆಲ್ಲ ತೀರ್ಮಾನಕ್ಕೆ ಬಂದಿದ್ದೇವೆ.

ನನಗೆ ರಾಜಕೀಯದ ಆಸೆ ಇಲ್ಲ. ಆದರೆ ನಾನೇ ಮೊದಲು ಭಟ್ಕಳದಲ್ಲಿ ಈ ಪ್ರಯೋಗ ಮಾಡಿಸುತ್ತೇನೆ. ಸುನೀಲ್ ನಾಯ್ಕ, ಮಂಕಾಳ ವೈದ್ಯ, ಜೆ.ಡಿ.ನಾಯ್ಕ, ಆರ್.ಎನ್.ನಾಯ್ಕ ಯಾರೇ ಆಕಾಂಕ್ಷಿ ಇದ್ದರೂ ಈ ವೇಳೆ ಹಿಂದೆ ಸರಿಯುತ್ತಾರೆ ಎಂದು ಭಾವಿಸಿದ್ದೇನೆ ಎಂದರು.

ಸಂತರಿಗೆಲ್ಲ ಕಣ್ಣೀರು ಬರುತ್ತಿದೆ:ಇಂದು ವಿಕೇಂದ್ರೀಕರಣ ಆಗುತ್ತಿಲ್ಲ. ಕೇಂದ್ರೀಕರಣ ಆಗುತ್ತಿದೆ ಎಂದ ಅವರು, ಸಂವಿಧಾನ ಪಾಲನೆಯಾಗುತ್ತಿದೆಯೋ ಇಲ್ಲವೋ ಎಂಬುದನ್ನು ನೋಡಲು ಪ್ರತಿ ತಾಲೂಕಿನಲ್ಲಿ ನ್ಯಾಯಾಧೀಶರ ವೀಕ್ಷಣಾ ಮಂಡಳಿ ರಚನೆಯಾಗಬೇಕು. ಚುನಾಯಿತರಾದ ಶಾಸಕರಿಗೆ ನಿವೃತ್ತ ನ್ಯಾಯಾಧೀಶರಿಂದ ತಿಂಗಳಿಗೆ ಐದು ದಿನವಾದರೂ ತರಬೇತಿ ನೀಡಬೇಕು.

ಸುಮ್ಮನೆ ಸಂವಿಧಾನ ಸಂವಿಧಾನ ಎಂದು ಸಂವಿಧಾನದ ಬಗ್ಗೆ ಮಾತನಾಡುತ್ತೀರಿ. ಸಂವಿಧಾನದ ತಲೆಯೂ ಗೊತ್ತಿಲ್ಲ, ಬುಡವೂ ಗೊತ್ತಿಲ್ಲ. ವಿಧಾನಸಭೆಯಲ್ಲಿ ಇಡೀ ದಿನ ಜಗಳ ಮಾಡುತ್ತಾರೆ. ಹೊರಗೆ ಬರುವಾಗ ಹೆಗಲ ಮೇಲೆ ಕೈ ಹಾಕಿಕೊಂಡು ಚಹಾ- ಊಟ ಸವಿಯುತ್ತಾರೆ. ಹೊರಗಡೆ ಈ ಹುಡುಗರೆಲ್ಲ ಕುಸ್ತಿ ಮಾಡುತ್ತಾರೆ. ಇದನ್ನ ನೋಡಿ ಸಂತರಿಗೆಲ್ಲ ಕಣ್ಣೀರು ಬರುತ್ತಿದೆ ಎಂದರು.

ಅಲ್ಲದೇ, ಸ್ವಾಮಿಗಳು ಓಟಿಗೆ ನಿಲ್ಲುತ್ತಾರೆಂದು ಯಾರೂ ಹೆದರಬೇಕಿಲ್ಲ. ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ಎಲ್ಲರನ್ನೂ ಸರಿಸಮಾನವಾಗಿ ಕಾಣಲು ನಾವು ರಾಜಕೀಯಕ್ಕೆ ಸ್ಪಧಿಸುತ್ತಿದ್ದೇವೆ. ಎಲ್ಲರೂ ಸಹೋದರತ್ವ ಪಾಲಿಸಬೇಕು ಎಂದರು.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.

Exit mobile version