Focus News
Trending

ಸಂಸದ ಅನಂತಕುಮಾರ್ ಹೆಗಡೆ ವಿರುದ್ಧದ ವ್ಯರ್ಥಾರೋಪ ಕಾಗೋಡು ತಿಮ್ಮಪ್ಪಗೆ ಶೋಭೆ ತರುವುದಿಲ್ಲ: ದಿನಕರ ಶೆಟ್ಟಿ

ಕುಮಟಾ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಜಿಲ್ಲೆಯ ಶಾಸಕರು ಹಾಗೂ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮಾಡಿರುವ ಆರೋಪಕ್ಕೆ ಯಾವುದೇ ಅರ್ಥವಿಲ್ಲ ಜೊತೆಗೆ ಮಾಜಿ ಸ್ಪೀಕರ್ ಆಗಿದ್ದ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ ಎಂದು ಶಾಸಕ ದಿನಕರ ಶೆಟ್ಟಿ ತಿರುಗೇಟು ನೀಡಿದರು.

ಹೊನ್ನಾವರದಲ್ಲಿ ಭಾನುವಾರ ನಡೆದ ಅರಣ್ಯ ಅತಿಕ್ರಮಣದಾರರ ಸಮಾವೇಶದಲ್ಲಿ ಮಾತನಾಡಿದ್ದ ಕಾಗೋಡು ತಿಮ್ಮಪ್ಪ ಅವರು ಜಿಲ್ಲೆಯ ಶಾಸಕರು, ಸಂಸದರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿರುವ ಶಾಸಕ ದಿನಕರ ಶೆಟ್ಟಿ, “ಅರಣ್ಯ ಅತಿಕ್ರಮಣದಾರರ ಸಮಸ್ಯೆ ಇಂದು ನಿನ್ನೆಯದಲ್ಲ. ದಶಕಗಳಿಂದ ಇಲ್ಲಿನ ಜನ ಆ ಸಮಸ್ಯೆಗೆ ತುತ್ತಾಗಿದ್ದಾರೆ. ಇವರ ಟೀಕೆಗೆ ಸಂಬಂಧಿಸಿ ಹೇಳುವುದಾದರೆ ಈ ಮೊದಲು ಕೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಸಮಸ್ಯೆ ಇತ್ಯರ್ಥ ಮಾಡಬಹುದಿತ್ತು. ಆದರೆ ಆಗ ಆಡಳಿತದಲ್ಲಿದ್ದ ಪಕ್ಷ ನಿಷ್ಕ್ರಿಯವಾಗಿದ್ದೇಕೆ ಎಂದು ಪ್ರಶ್ನಿಸಿದರು. ಜೊತೆಗೆ ಆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿದ ಕಾರಣಕ್ಕೆ ಈ ಸಮಸ್ಯೆ ದೊಡ್ಡದಾಗಿ ಬೆಳೆದಿದೆ ಎಂದರು.

ಸಂಸದ ಅನಂತಕುಮಾರ ಹೆಗಡೆ ಅವರ ಬಗ್ಗೆ ಆರೋಪಿಸಲು ಕಾಗೋಡು ತಿಮ್ಮಪ್ಪ ಅವರಿಗೆ ಯಾವುದೇ ನೈತಿಕತೆ ಇಲ್ಲ. ಬಿಜೆಪಿ ಸರ್ಕಾರ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಬಗೆಹರಿಸಲು ಪ್ರಯತ್ನ ನಡೆಸುತ್ತಿದೆ. ಪ್ರಚಾರದ ಕಾರಣಕ್ಕೆ ವಿರೋಧ ಮಾಡುವವರ ಮಾತಿಗೆ ಪ್ರತಿಕ್ರಿಯೆ ನೀಡಬೇಕಾದ ಅಗತ್ಯ ಇಲ್ಲ ಎಂದು ಹೇಳಿದರು.

ವಿಸ್ಮಯ ನ್ಯೂಸ್ ಕುಮಟಾ

Back to top button