ಕರಾವಳಿಯಲ್ಲಿ ಹಿಗ್ಗು ತಂದ ಸುಗ್ಗಿ: ಸಾಂಪ್ರದಾಯಿಕ ಆಚರಣೆ ಉಳಿವಿಗೆ ಬೇಕಿದೆ ಸರ್ಕಾರದ ಸಹಕಾರ!

ಕಾರವಾರ: ಹೋಳಿ ಹುಣ್ಣಿಮೆ ಹತ್ತಿರವಾದ ಬೆನ್ನಲ್ಲೆ ಉತ್ತರಕನ್ನಡ ಜಿಲ್ಲೆಯಲ್ಲಿ ಸುಗ್ಗಿಯ ಸಂಭ್ರಮ ಮುಗಿಲು ಮುಟ್ಟಿದೆ. ಜಿಲ್ಲೆಯಲ್ಲಿನ ಹಾಲಕ್ಕಿ, ಕೋಮಾರಪಂಥ, ಗ್ರಾಮ ಒಕ್ಕಲಿಗ, ನಾಮಧಾರಿ, ಅಂಬಿಗ, ಗುನಗಿ ಸೇರಿದಂತೆ ಅನೇಕ ಸಮಾಜದವರು ತಮ್ಮ ಸಾಂಪ್ರದಾಯಿಕ ಕಲೆಯಾದ ಸುಗ್ಗಿ ಕುಣಿತವನ್ನು ಹೋಳಿ ಹಬ್ಬಕ್ಕೂ ಮುಂಚಿತವಾಗಿ ಪ್ರಾರಂಭಿಸಿದ್ದಾರೆ. ಹಬ್ಬಕ್ಕೆ ಏಳು, ಒಂಬತ್ತು ಇಲ್ಲವೇ 11 ದಿನಗಳ ಮುನ್ನ ಸುಗ್ಗಿ ಕಟ್ಟುವ ತಂಡ ಬಳಿಕ ಊರೂರು ತಿರುಗಿ ತಮ್ಮ ಸಮಾಜದವರ ಮನೆಗೆ ತೆರಳಿ ಕುಣಿತದ ಪ್ರದರ್ಶನ ನಡೆಸುತ್ತಿದ್ದಾರೆ.

ಅದರಂತೆ ಅಂಕೋಲಾ ತಾಲ್ಲೂಕಿನ ಅವರ್ಸಾದ ಕ್ಷತ್ರೀಯ ಕೋಮಾರಪಂಥದ ಸುಗ್ಗಿಯನ್ನು ಏಳು ವರ್ಷದ ಬಳಿಕ ಆರಂಭಿಸಲಾಗಿದೆ. ತಮ್ಮ ಸಮುದಾಯದವರು ಇರುವಲ್ಲಿಗೆ ತೆರಳಿ ಸುಗ್ಗಿ ಕುಣಿತವನ್ನು ಪ್ರದರ್ಶಿಸುತ್ತಿದ್ದಾರೆ. ಹೋಳಿ ಹುಣ್ಣಿಮೆಗೂ 9 ದಿನಗಳ ಮುಂಚೆ ಸುಗ್ಗಿ ಕುಣಿತವನ್ನು ಪ್ರಾರಂಭಿಸಲಾಗಿದೆ. ಈಗಾಗಲೇ ತಮ್ಮ ಸಮುದಾಯದವರು ಇರುವ ಕಡೆಯ ಮನೆಗಳ ಮುಂದೆ ತೆರಳಿ ಸುಗ್ಗಿ ಕುಣಿತ ಆಡಲಾಗುತ್ತಿದೆ.

ಹೀಗೆ ಆಡುವುದರಿಂದ ಜನರಿಗೆ ಎದುರಾಗಿರುವ ಸಮಸ್ಯೆ, ತೊಂದರೆಗಳು ಬಗೆಹರಿಯುವುದರ ಜೊತೆಗೆ ಯಾವುದೇ ರೋಗಗಳೂ ಮನೆಯವರಿಗೆ ಬರದಂತೆ ತಡೆಯುತ್ತದೆ. ಇದು ಅನಾದಿಕಾಲದಿಂದಲೂ ನಡೆದುಕೊಂಡ ಬಂದ ಪ್ರಕ್ರಿಯೆಯಾಗಿದೆ. ಕಳೆದ ಕೆಲ ವರ್ಷಗಳಿಂದ ಸುಗ್ಗಿ ಆಡಿರಲಿಲ್ಲ. ಆದರೆ ಈ ಬಾರಿ ಊರೂರು ಸುತ್ತುತ್ತಾ ಸುಗ್ಗಿ ಆಡಲಾಗುತ್ತಿದೆ. ಹೀಗೆ ಆಡುವ ಸುಗ್ಗಿಯನ್ನು ಮನೆ ಬಾಗಿಲಿಗೆ ಕರೆಸಿ ಆಡಿಸಿದಲ್ಲಿ ಒಳ್ಳೆದಾಗುತ್ತದೆ ಎಂಬ ನಂಬಿಕೆ ಜನರಲ್ಲಿದೆ ಎನ್ನುತ್ತಾರೆ ಸಮುದಾಯದ ಹಿರಿಯರಾದ ನಾಗೇಂದ್ರ ಮಹಾದೇವ ನಾಯ್ಕ.

ಇನ್ನು ಈ ಸುಗ್ಗಿ ಕುಣಿತಕ್ಕೆ ತನ್ನದೇ ಆದ ವಿಶೇಷವಿದೆ. ಇಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು, ತಲೆಗೆ ಬಣ್ಣ ಬಣ್ಣದ ತುರಾಯಿ, ಪೇಟವನ್ನ ಕಟ್ಟಿ, ಪೊಗಡೆ ವೇಷಭೂಷಣ ಧರಿಸಿ ಸುಗ್ಗಿ ಕುಣಿಯುವುದು ಎಲ್ಲರ ಮನಸೆಳೆಯುತ್ತದೆ. ಇದರೊಂದಿಗೆ ಗುಮಟೆ, ಜಾಗಟೆಯ ಸದ್ದು, ವಾದ್ಯಗಳ ಹಿಮ್ಮೇಳ ಸುಗ್ಗಿ ಕುಣಿತಕ್ಕೆ ಇನ್ನಷ್ಟು ಮೆರಗು ನೀಡುತ್ತದೆ. ಒಮ್ಮೆ ವೇಷತೊಟ್ಟು ಹಣೆಗೆ ಗಂಧವನ್ನ ಇಟ್ಟುಕೊಂಡು ಹೊರಟರೆ ಸುಗ್ಗಿ ಕುಣಿತ ಮುಗಿಸುವ ಏಳು ದಿನದವರೆಗೂ ವಾಪಾಸ್ ಮನೆಗೆ ತೆರಳುವಂತಿಲ್ಲ. ಜೊತೆಗೆ ಸಮಾಜದ ಮನೆಯವರ ಅಂಗಳದಲ್ಲಿ ಸುಗ್ಗಿ ಕುಣಿತ ಮಾಡಿದಾಗ ಅವರು ನೀಡುವ ಹಣ, ಊಟ ತಿಂಡಿ ಸ್ವೀಕರಿಸುವ ಪ್ರತೀತಿ ಇದೆ. ಸುಗ್ಗಿ ಆಡುವ ತಂಡದವರು ಒಂದು ತಿಂಗಳ ಮೊದಲೇ ತಯಾರಿಯನ್ನು ಆರಂಭಿಸುತ್ತಾರೆ.

ಸುಗ್ಗಿ ಆಡುವಾಗ ತಲೆಯ ಮೇಲೆ ಹೊರುವ ತುರಾಯಿಗಳು ಎಷ್ಟಿರಬೇಕು ಎಂದು ನಿಗದಿಪಡಿಸಿಕೊಂಡು ಬಳಿಕ ಅವುಗಳನ್ನ ಸಿದ್ಧಪಡಿಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಇದಾದ ಬಳಿಕ ಹೋಳಿಗೆ ಎಂಟು ದಿನಗಳಿಗೆ ಮುನ್ನ ಸುಗ್ಗಿ ತಂಡದೊoದಿಗೆ ಹೊರಟು ಸಮುದಾಯದ ಮನೆಗಳವರು ತಮ್ಮನ್ನು ಆಹ್ವಾನಿಸಿದಲ್ಲಿಗೆ ತೆರಳಿ ಕುಣಿತವನ್ನ ಪ್ರದರ್ಶನ ಮಾಡಲಾಗುತ್ತದೆ. ಹೀಗೆ ಬಂದವರಿಗೆ ಕಾಯಿ ವಿಳ್ಳೆದೆಲೆ ಹಾಗೂ ದೇಣಿಗೆ ನೀಡಲಾಗುತ್ತದೆ. ಹೀಗೆ ಮಾಡುವುದರಿಂದ ನಮ್ಮಮನೆಗಳಿಗೆ ಯಾವುದೇ ರೋಗ ರುಜಿನಗಳು ಬಾರದಂತೆ ಕರಿ ದೇವರು ಕಾಪಾಡುತ್ತದೆ ಎಂಬ ನಂಬಿಕೆ ಜನರಲ್ಲಿದೆ. ಆದರೆ ಸುಗ್ಗಿ ಕುಣಿತಕ್ಕೆ ಸಾಕಷ್ಟು ಕರ್ಚು ತಗಲುವುದರಿಂದ ಸರ್ಕಾರ ಈ ಬಗ್ಗೆ ಗಮನ ಹರಿಸಿ ಸಹಾಯದನ ಘೋಷಣೆ ಮಾಡಬೇಕು ಎಂದು ತಂಡದ ರವೀರಾಜ್ ನಾಯ್ಕ ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಜಾನಪದ ಕಲೆಗಳು ವಿನಾಶದ ಅಂಚಿನಲ್ಲಿರುವ ಈ ದಿನಗಳಲ್ಲಿ ತಲೆ ತಲಾಂತರಗಳಿoದ ಬಂದಿರುವ ಸಾಂಪ್ರದಾಯಿಕ ಸುಗ್ಗಿಕುಣಿತದ ಕಲೆಯನ್ನ ಇಂದಿಗೂ ನಡೆಸಿಕೊಂಡು ಬರುತ್ತಿರುವುದು ನಿಜಕ್ಕೂ ಶ್ಲಾಘನೀಯ. ಸುಗ್ಗಿಯಲ್ಲಿ ಮಕ್ಕಳು, ಯುವಕರೂ ಸಹ ಹಿರಿಯರೊಂದಿಗೆ ಒಟ್ಟಾಗಿ ಪಾಲ್ಗೊಳ್ಳುವುದರಿಂದ ಮುಂದಿನ ಪೀಳಿಗೆಗೂ ಆಚರಣೆಗಳನ್ನ ತಿಳಿಸಿಕೊಡುವಲ್ಲಿ ಸುಗ್ಗಿ ಕುಣಿತ ಸಹಕಾರಿಯಾಗಿರುವುದಂತೂ ಸತ್ಯ.

ವಿಸ್ಮಯ ನ್ಯೂಸ್, ಕಾರವಾರ

Exit mobile version