ಬಿಜೆಪಿ ಕಾರ್ಯಾಲಯದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ

ಭಟ್ಕಳ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಮಂಡಲ ಮಹಿಳಾ ಮೋರ್ಚಾ ಸಹಯೋಗದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯನ್ನು ಆಚರಿಸಲಾಯಿತು. ಮಂಡಲದ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ನಾಯ್ಕ ರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಶಿವಾನಿ ಶಾಂತರಾಮವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಳೆದ 20ವರ್ಷಗಳಿಂದ ಕಸೂತಿ ಕೆಲಸದಲ್ಲಿ ತೊಡಗಿಸಿಕೊಂಡು ಹಲವಾರು ವಿದ್ಯಾರ್ಥಿಗಳಿಗೆ ಕಸೂತಿ ಕೆಲಸವನ್ನು ಕಲಿಸಿಕೊಟ್ಟ ಶ್ರೀಮತಿ ಶಾಂತಿ ವೆಂಕಟೇಶ್ ನಾಯ್ಕ ಹಾಗೂ ಶ್ರೀಮತಿ ಗಾಯತ್ರಿ ಪ್ರದೀಪ್ ಹರಿದಾಸ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ವಿಶ್ವ ವಿದ್ಯಾಲಯ ನಡೆಸುವ ಬಿ.ಬಿ.ಎ ಪದವಿ ಪರೀಕ್ಷೆಯಲ್ಲಿ ಎರಡನೇ ರ್ಯಾಂಕ್ ಪಡೆದ ಭಟ್ಕಳ ದ ಗ್ರಾಮೀಣ ಪ್ರತಿಭೆ ವೃಂದ ಆರ್ ಜೋಗಿಯವರನ್ನು ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ ಕೈ ಮಗ್ಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ್, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸುನೀತಾ ಉಪಸ್ಥಿತರಿದ್ದರು. ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕುಪ್ಪು ಗೊಂಡ ಕಾರ್ಯಕ್ರಮವನ್ನು ನಿರೂಪಿಸಿ ವಂದನಾರ್ಪಣೆ ಮಾಡಿದರು.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Exit mobile version